ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಅಂಗವಾಗಿ ಬುಧವಾರ ಮಧ್ಯಾಹ್ನ ಸಾವಿರಾರು ಭಕ್ತರು ಉಪಸ್ಥಿತಿಯಲ್ಲಿ ಶ್ರೀ ಮೂಕಾಂಬಿಕಾ ದೇವಿಯ ವೈಭವದ ರಥೋತ್ಸವ ಸಂಪನ್ನಗೊಂಡಿತು.

ನವರಾತ್ರಿ ಪ್ರಾರಂಭವಾದ ದಿನದಿಂದ ಮಹಾನವಮಿಯ ತನಕವೂ ದೇವಸ್ಥಾನದಲ್ಲಿ ವಿವಿಧ ಪೂಜೆ ಹಾಗೂ ಧಾರ್ಮಿಕ ಆಚರಣೆಯನ್ನು ನಡೆಸಲಾಗಿತ್ತು. ಬುಧವಾರ ಮಧ್ಯಾಹ್ನ ತಂತ್ರಿ ನಿತ್ಯಾನಂದ ಅಡಿಗರ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿಗಳ ಬಳಿಕ ದೇಗುಲದಿಂದ ಹೊರಕ್ಕೆ ತರಲಾದ ಶ್ರೀ ದೇವಿಯ ಉತ್ಸವ ಮೂರ್ತಿಯ ಪ್ರದಕ್ಷಿಣೆ ಹಾಗೂ ಬಲಿ ಸೇವೆ ನಡೆಸಿದ ಬಳಿಕ ಶ್ರೀ ದೇವಿಯನ್ನು ಅಲಂಕರಿಸಿದ ಪುಷ್ಪ ರಥದಲ್ಲಿ ಕುಳ್ಳಿರಿಸಲಾಯಿತು.

ರಥ ಪೂಜೆ ನಡೆಸಿದ ತಂತ್ರಿಗಳು ಬಳಿಕ ಶ್ರೀದೇವಿಗೆ ಪೂಜೆ ನೆರವೇರಿಸಿ, ಮಂಗಳಾರತಿ ಎತ್ತಿದ ಬಳಿಕ, ಸೇರಿದ್ದ ಸಾವಿರಾರು ಜನರು ಶ್ರೀ ದೇವಿಯ ಜಯ ಘೋಷದೊಂದಿಗೆ ರಥವನ್ನು ಎಳೆದರು. ದೇವಳದ ಒಳ ಪ್ರಾಂಗಣದಲ್ಲಿ ಒಂದು ಸುತ್ತು ರಥ ಕ್ರಮಿಸಿತು.
ಬುಧವಾರ ನಡೆದ ಶರನ್ನವರಾತ್ರಿ ಉತ್ಸವಕ್ಕೆ ದೇಶದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಕೋಟಿ ಹರಿದು ಬಂದಿತ್ತು. ಭಕ್ತಾಭಿಮಾನಿಗಳ ನೂಕುನುಗ್ಗಲು ಆಗದಂತೆ ಡಿವೈಎಸ್ಪಿ ಹೆಚ್.ಡಿ.ಕುಲಕರ್ಣಿ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ, ಸದಸ್ಯರಾದ ಪಿ.ವಿ.ಅಭಿಲಾಶ್, ರಘುರಾಮ ದೇವಾಡಿಗ ಆಲೂರು, ಮಹಾಲಿಂಗ ನಾಯ್ಕ, ರಾಜೇಶ್ ಕಾರಂತ್, ಸುರೇಂದ್ರ ಶೆಟ್ಟಿ, ಧನಾಕ್ಷೀ ಪೂಜಾರಿ, ಸುಧಾ ಬೈಂದೂರು, ಶಾಸಕರಾದ ಗುರುರಾಜ್ ಗಂಟಿಹೊಳೆ, ಹರೀಶ್ ಪೂಂಜಾ ಮುಂತಾದವರಿದ್ದರು.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading