ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಮಧ್ಯಾಹ್ನ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆಯುವುದರೊಂದಿಗೆ ಶ್ರೀದೇವಿಗೆ ಒಂದು ಕೆಜಿ 600 ಗ್ರಾಂ ತೂಕದ ಬೆಳ್ಳಿಯ ಖಡ್ಗವನ್ನು ಸಮರ್ಪಿಸಿದರು.
ದೇಶದಲ್ಲೇ ಶಕ್ತಿ ಪೀಠವಾಗಿ ಹೆಸರಾಗಿರುವ ಕೊಲ್ಲೂರು ಕ್ಷೇತ್ರಕ್ಕೆ ಮೊದಲಿನಿಂದಲೂ ತಮಿಳುನಾಡಿನ ಹಲವು ಮುಖ್ಯಮಂತ್ರಿಗಳು ಭೇಟಿ ನೀಡಿದ್ದು, ಈ ಹಿಂದೆ ತಮಿಳುನಾಡು ಮುಖ್ಯಮಂತ್ರಿಗಳಾಗಿದ್ದ ಎಂ.ಜಿ. ರಾಮಚಂದ್ರನ್, ಜಾನಕಿ ರಾಮಚಂದ್ರನ್, ಜಯಲಲಿತಾ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಎಂ.ಜಿ. ರಾಮಚಂದ್ರನ್ ಅವರ ಪತ್ನಿ ಜಾನಕಿ ರಾಮಚಂದ್ರನ್ ಮೂಲತಃ ಉಡುಪಿ ಜಿಲ್ಲೆಯವರಾಗಿದ್ದು ಕೊಲ್ಲೂರು ಕ್ಷೇತ್ರದ ಭಕ್ತರಾಗಿದ್ದು, ತಮಿಳುನಾಡಿನ ಮುಖ್ಯಮಂತ್ರಿ ಎಂ.ಜಿ. ರಾಮಚಂದ್ರನ್ ಸಹ ಮೂಕಾಂಬಿಕೆ ದೇವಿಯ ಪರಮ ಭಕ್ತರಾಗಿದ್ದು ಹಲವು ಬಾರಿ ಅವರು ಕೊಲ್ಲೂರಿಗೆ ಭೇಟಿ ನೀಡಿ ವಿಶೇಷ ಪೂಜೆಗಳನ್ನು ನೆರವೇರಿಸಿದ್ದರು.
ಮುಖ್ಯಮಂತ್ರಿಯಾದ ನಂತರ ಜೋಸೆಫ್ ವಿಜಯ್ ಅವರು ಯಾವುದೇ ದೇವಸ್ಥಾನಗಳಿಗೆ ಭೇಟಿ ನೀಡಿರಲಿಲ್ಲ. ಮುಖ್ಯಮಂತ್ರಿ ಆಗುವ ಮೊದಲು ಅವರು ತಮಿಳುನಾಡಿನ ತಿರುಚಂದೂರ್ ಸೇರಿದಂತೆ ಹಲವು ಪ್ರಖ್ಯಾತ ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಅವರು ಕೊಲ್ಲೂರಿಗೆ ಆಗಮಿಸಿದ್ದಾರೆ.

